
ಧರ್ಮದ ಚೌಕಟ್ಟಿನಲ್ಲಿ ಜಾತಿ ಹೆಸರಲ್ಲಿ ಶೋಷಣೆ : ಬಿ.ಕೆ.ಹರಿಪ್ರಸಾದ್
ಬೆಂಗಳೂರು : ಜಾತಿ ಪದ್ದತಿ ಮಾನವ ಹಕ್ಕುಗಳ ಉಲ್ಲಂಘನೆ. ಜಾತಿ ಹೆಸರಿನಲ್ಲಿ ದಬ್ಬಾಳಿಕೆ ಮತ್ತು ಜಾತಿಯ ಹೆಸರಿನಲ್ಲಿ ಶೋಷಣೆ ಯಾಗುತ್ತಿದೆ. ಇದಕ್ಕೆಲ್ಲಾ ಕಾರಣ ಧರ್ಮದ ಹೆಸರಿನ ಚೌಕಟ್ಟು. ಹೀಗಾಗಿ ಹಿಂದುಳಿದ ವರ್ಗಗಳ ಸಮುದಾಯಗಳು ತ್ರಿಶಂಕು ಸ್ಥಿತಿಯಲ್ಲಿವೆ ಎಂದು ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯ ಮಟ್ಟದ ಮುಖಂಡ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು. ಸಂವಿಧಾನ ಬಹುಸಂಖ್ಯಾತರಿಗೆ ಮೀಸಲು ಅಲ್ಲ. ಎಲ್ಲಾ ವರ್ಗದ ಜನರಿಗೂ ಸಂವಿಧಾನದಲ್ಲಿ ಅವಕಾಶವಿದೆ. ಈ ಅವಕಾಶ ಮತ್ತು ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದ್ರು. ನೀವು ಯಾವ ಪಕ್ಷ ಅಂತ ನೋಡಬೇಡಿ. ನಿಮಗೆ ಯಾರು ಸಹಾಯ ಮಾಡುತ್ತಾರೋ ಅವರಿಗೆ ಮತ ಹಾಕಿ. ಜನಪ್ರತಿನಿಧಿಗಳಿಗೆ ನಮ್ಮ ಶಕ್ತಿ ಏನು ಎಂಬುದು ಗೊತ್ತಾಗುತ್ತದೆ ಎಂದು ಹೇಳಿದ್ರು. ನಮ್ಮ ವ್ಯವಸ್ಥೆಯಲ್ಲಿ ಪರಿಶಿಷ್ಟ ಜಾತಿಗೆ ರಾಜಕೀಯ ಮೀಸಲಾತಿ ಇದೆ. ಆದ್ರೆ ಹಿಂದುಳಿದ ವರ್ಗಕ್ಕೆ ರಾಜಕೀಯ ಮೀಸಲಾತಿ ಇಲ್ಲ. ಹಾಗೇ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಿದ್ದಾರೆ. ಆದ್ರೆ ಹಿಂದುಳಿದ ವರ್ಗಕ್ಕೆ ನೀಡಿದ್ದ ಮೀಸಲಾತಿಯನ್ನು ತೆಗೆದುಹಾಕಿದ್ದಾರೆ.
ಹೀಗಾಗಿ ಹಿಂದುಳಿದ ವರ್ಗಗಳು ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಹೇಳಿದ್ರು. ಸಂವಿಧಾನದಲ್ಲಿರುವ ನಮ್ಮ ಹಕ್ಕು ಮತ್ತು ಅವಕಾಶಗಳನ್ನು ಪಡೆದುಕೊಳ್ಳಲು ನಾವು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಸುಧಾರಣೆಯಾಗಬೇಕು ಎಂದು ತಿಳಿಸಿದರು. ಇದಕ್ಕೂ ಮುನ್ನ ಮಾತನಾಡಿದ ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯಾಧ್ಯಕ್ಷರಾದ ಎಮ್. ನಾಗರಾಜ್, ಹೆಳವ ಸಮುದಾಯ ಅಕ್ಷರ ಜ್ಞಾನವಿಲ್ಲದಿದ್ದರೂ ಮೌಖಿಕವಾಗಿಯೇ ತಮ್ಮ ವಿಶಿಷ್ಟ ಕಲಾ ನೈಪುಣ್ಯತೆಯಿಂದ 500 ರಿಂದ 600 ವರ್ಷದ ವಂಶಾವಳಿ ಹೇಳುತ್ತದೆ. ಹೆಳವರು ಉಳಿದವರ ಕುಲದ ಕಥೆ ಹೇಳಿದರು,
ಇತಿಹಾಸ ಕಟ್ಟಿಕೊಟ್ಟರು, ಆದರೆ ತಮ್ಮ ಇತಿಹಾಸವನ್ನು ಬರೆದಿಡಲಿಲ್ಲ, ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಲಿಲ್ಲ. ಇದೀಗ ತಮ್ಮ ಸಮಾಜಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಿದೆ. ಸರ್ಕಾರದ ಯಾವುದೇ ಸೌಲಭ್ಯಗಳು ಹೆಳವ ಸಮುದಾಯಕ್ಕೆ ಸಿಗುತ್ತಿಲ್ಲ. ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ರಾಜಕೀಯವಾಗಿಯೂ ಹೆಳವ ಸಮಾಜ ತುಂಬಾ ಹಿನ್ನಡೆಯಲ್ಲಿದೆ. ಹೀಗಾಗಿ ಸರ್ಕಾರ ಮುಂದಿನ ದಿನಗಳಲ್ಲಿ ಹೆಳವ ಸಮಾಜದ ಅಭಿವೃದ್ದಿಗೆ ಸ್ಪಂದಿಸಬೇಕು ಮತ್ತು ಸಮುದಾಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದವರಾಗಿರುವ ಹೆಳವ ಸಮುದಾಯದ ಸಮಸ್ಯೆಗಳು ಒಂದೆರಡಲ್ಲ. ಹೆಳವರು ಮೂಲತಃ ಅಲೆಮಾರಿಗಳು, ಇವರಿಗೆ ಸುಲಭವಾಗಿ ಜಾತಿ ಪ್ರಮಾಣಪತ್ರ ಸಿಗುವುದಿಲ್ಲ. ಇವರು ಶೈಕ್ಷಣಿಕವಾಗಿ ಕೇವಲ 2%ರಷ್ಟು ಮಾತ್ರ ಮುಂದುವರೆದಿದ್ದಾರೆ, ಇವರಲ್ಲಿ ಬಹುತೇಕರ ಮತದಾರರ ಗುರುತಿನ ಚೀಟಿ ಇಲ್ಲ, ಪಡಿತರ ಚೀಟಿ ಮತ್ತು ಆಧಾರ ಕಾರ್ಡ್ನಂತಹ ಗುರುತೂ ಸಹ ಇಲ್ಲ. ಸಂಘಟನಾತ್ಮಕವಾಗಿ, ರಾಜಕೀಯವಾಗಿ ಗುರುತಿಸಿಕೊಳ್ಳದ ಹೆಳವರು, ಇಂದಿಗೂ ತಮ್ಮ ಸಮಾಜದ ಸಭೆಯನ್ನು ಬೀದಿಯಲ್ಲಿ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಮ್ಮ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಎಮ್. ನಾಗರಾಜ್ ಮಾಹಿತಿ ನೀಡಿದರು.
ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಕೇರಳ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಹೆಳವ ಸಮಾಜದವರಿದ್ದಾರೆ. ಚಳ್ಳಕೆರೆ ತಾಲೂಕಿನ ಜಡೆಕುಂಟೆ, ಶಿವಮೊಗ್ಗ, ಗುಲ್ಬರ್ಗ ಬಿಜಾಪುರ, ಕಾರವಾರ ಜಿಲ್ಲೆಗಳಲ್ಲಿ ಹೆಳವರು ಅಲೆಮಾರಿಗಳಂತೆ ಗುಢಾರಗಳನ್ನು ನಿರ್ಮಿಸಿಕೊಂಡು ಬದುಕುತ್ತಿದ್ದಾರೆ. ಪ್ರವರ್ಗ-1ರಲ್ಲಿ ಸೇರಿಸಲಾದ ಹೆಳವ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಸರ್ಕಾರ ಹಂಪಿ ವಿಶ್ವವಿದ್ಯಾನಿಲಯಕ್ಕೆ ಸೂಚನೆ ನೀಡಿತ್ತು. ಆದರೆ ಕುಲಶಾಸ್ತ್ರೀಯ ಅಧ್ಯಯನ ಮುಗಿದು ಕರ್ನಾಟಕದ ಹೆಳವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬಹುದು ಎಂದು ವರದಿ ಬಂದು ಪರಿಶಿಷ್ಟ ಪಂಗಡ ಮತ್ತು ಬುಡಕಟ್ಟು ಅಧ್ಯಯನ ಸಂಸ್ಥೆ ಮೈಸೂರು ಇವರು ಶಿಫಾರಸು ಮಾಡಿ ನಾಲ್ಕು ವರ್ಷ ಕಳೆದರೂ ಸರ್ಕಾರ ಮಾತ್ರ ಹೇಳುವ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿಲ್ಲ ನಾಲ್ಕು ವರ್ಷಗಳಿಂದ ಈ ಕಡತವು ಸಮಾಜ ಕಲ್ಯಾಣ ಇಲಾಖೆಯಲ್ಲಿ ನೆನೆಗುದಿಗೆ ಬಿದ್ದಿದೆ. ಹೆಳವ ಸಮುದಾಯದ ಜನರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು, ಅವರನ್ನೂ ಉಳಿದ ಸಮುದಾಯದವರಂತೆ ಪರಿಗಣಿಸಬೇಕು ಅನ್ನುವುದು ಈ ಸಮುದಾಯದ ಬಹುಕಾಲದ ಬೇಡಿಕೆಯಾಗಿದೆ ಎಂದರು.
ಸರ್ಕಾರಿ ದಾಖಲಾತಿಗಳು, ಪ್ರಮಾಣ ಪತ್ರ, ಗುರುತಿನ ಚೀಟಿ ಮತ್ತು ಹಕ್ಕುಪತ್ರಗಳನ್ನು ನೀಡಬೇಕು. ಹೆಳವರ ಮಕ್ಕಳಿಗೆ ಶಿಕ್ಷಣ ಲಭಿಸಬೇಕು ತನ್ಮೂಲಕ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಈ ಸಮುದಾಯವನ್ನು ಅಭಿವೃದ್ಧಿಗೊಳಿಸುವ ಅಗತ್ಯವಿದೆ. ಹಾಗೆಯೇ ಈ ಸಮಾಜಕ್ಕೆ ಸೂಕ್ತ ಮೀಸಲಾತಿ ಒದಗಿಸಿ ಆರ್ಥಿಕ ಪ್ರಗತಿಯ ಆಯಾಮವನ್ನೂ ಸರ್ಕಾರ ತುರ್ತಾಗಿ ಪರಿಗಣಿಸಬೇಕಿದೆ ಎಂದು ಎಮ್. ನಾಗರಾಜ್ ಒತ್ತಾಯಿಸಿದ್ರು. ಬಳಿಕ ಹೆಳವ ಸಮಾಜದ ಗುರು ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಬಸವ ಭೃಂಗೇಶ್ವರ ಸ್ವಾಮಿಗಳು ಹಾಗೂ ಸಿದ್ದಪ್ಪನ ಕಟ್ಟೆ ಮಾವಿನ ಬಾವಿಯ ಸ್ವಾಮೀಜಿ ಶ್ರೀ ಬಸವರಾಜ ಗುರೂಜಿ ಅವರು ಆಶೀರ್ವಚನ ನೀಡಿದರು.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಕರ್ನಾಟಕ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್, ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯಾಧ್ಯಕ್ಷ ಎಮ್. ನಾಗರಾಜ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಪಿ.ಎನ್. ಶ್ರೀನಿವಾಸಚಾರಿ, ಕೆ.ಆರ್. ನಿರಂಜನ್, ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಖಜಾಂಚಿ ಎಮ್.ಎ. ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.